ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನಾಗರಿಕ ಸೌಲಭ್ಯ ವಸತಿ ನಿಲಯ ದಿಂದ ಹಲವು ಬಡಜನರಿಗೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ 2024-25ನೇ ಸಾಲಿನಲ್ಲಿ ಶ್ರೀಮತಿ ಸುಧಾ ಮೂರ್ತಿ ರಾಜ್ಯ ಸಭಾ ಸಂಸದರು ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಾಗರಿಕ ಸೌಲಭ್ಯ ವಸತಿ ನಿಲಯ ದ ಭೂಮಿ ಪೂಜೆ ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆ, ರಾಜ್ಯ, ದೇಶ ಅಭಿವೃದ್ದಿ ಹೊಂದಲು ಸಮಾಜದ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಂತರಾಗಿರುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸಹ ಅತಿ ಹೆಚ್ಚಿನ ಅನುದಾನ ಆರೋಗ್ಯ ಕ್ಷೇತ್ರಕ್ಕೆ ವ್ಯಯಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ.ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರು ಸ್ವಾಸ್ಥ ಸುಂದರ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕರೋನಾ ಮಹಾಮಾರಿ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಸರ್ಕಾರಿ ಆಸ್ಪತ್ರೆ ಸೇರಿದಂತೆ ಬಿಎಲ್ಡಿಇ ಆಸ್ಪತ್ರೆ, ಅಲ್ಅಮೀನ್ ಜಿಲ್ಲೆಯ ಜನರ ಹಿತಕ್ಕಾಗಿ ಕಾರ್ಯನಿರ್ವಹಿಸಿವೆ. ಬಿಎಲ್ಡಿಇ ಸಂಸ್ಥೆ ಕರೋನಾ ಸಂದರ್ಭದಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದರಿಂದ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಪ್ರೊತ್ಸಾಹಿಸಿದೆ. ಆರೋಗ್ಯ ಮುಂಜಾಗ್ರತೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಇಲ್ಲಿ ನಿರ್ಮಾಣವಾಗುತ್ತಿರುವ ನಾಗರಿಕ ಸೌಲಭ್ಯವುಳ್ಳ ವಸತಿ ನಿಲಯ ಅತ್ಯುಪಯುಕ್ತವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಬಂಧಿಕರಿಗೆ ನಿರ್ಮಾಣವಾಗುತ್ತಿರುವ ನಾಗರಿಕ ವಸತಿ ನಿಲಯ ಅನುಕೂಲ ಒದಗಿಸಲಿದೆ. ಇದರಿಂದ ರೈತಾಪಿ ವರ್ಗ ಸೇರಿದಂತೆ ಬಡವರಿಗೆ ಅನುಕೂಲವಾಗಲಿದ್ದು, ಆರ್ಥಿಕ ಹೊರೆಯು ಕಡಿಮೆಯಾಗಲಿದೆ. ಕಟ್ಟಡದ ನಿರ್ಮಾಣದ ನಂತರ ಅದರ ನಿರ್ವಹಣೆ ಅತ್ಯಂತ ಮುಖ್ಯವಾಗಿದೆ. ಸುಧಾಮೂರ್ತಿ ಅವರು ವಿಜಯಪುರ ಜಿಲ್ಲೆಯನ್ನು ನೋಡಲ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಸಚಿವರು ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿ ಎಲ್ಲರೂ ಶ್ರಮಿಸೊಣ ಎಂದು ಹೇಳಿದರು.
ಇದನ್ನೂ ಓದಿ: Vijayapura News | ಬದುಕಿನ ಸಾಮರಸ್ಯದ ಕವಿ ಬೇಂದ್ರೆ – ಡಾ ಭಾರತಿ ಖಾಸನಿಸ್
ರಾಜ್ಯಸಭಾ ಸಂಸದೆ ಡಾ. ಸುಧಾಮೂರ್ತಿ ಅವರು ಮಾತನಾಡಿ, ಜಿಲ್ಲಾಸ್ಪತ್ರೆಗೆ ರೋಗಿಗಳೊಂದಿಗೆ ಬರುವವರಿಗಾಗಿ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಾಣವಾಗುತ್ತಿರುವ ನಾಗರಿಕ ಸೌಲಭ್ಯ ವಸತಿ ನಿಲಯ ಕಟ್ಟಡದ ಸದುಪಯೋಗವಾಗಬೇಕು. ವಿವಿಧೆಡೆ ನಾಗರಿಕ ಸೌಲಭ್ಯವುಳ್ಳ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ರೋಗಿಯೊಂದಿಗೆ ಬರುವ ಸಹಾಯಕರಿಗೆ ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಜಯಪುರಕ್ಕೂ ನನಗೂ ಭಾವನಾತ್ಮಕ ಸಂಬಂಧವಿದೆ. ಈ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯನ್ನು ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು. ಮಹಿಳೆಯರಲ್ಲಿರುವ ಪ್ರತಿಭೆಗಳನ್ನು ಹೊರತಂದು ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ತಾಳಿಕೋಟೆ ಮತ್ತು ಬಸವನಬಾಗೇವಾಡಿಯಲ್ಲಿ ಗ್ರಂಥಾಲಯ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಎಲ್ಲರೂ ಕೈ ಜೋಡಿಸಿ ಸಹಕರಿಸಬೇಕು ಎಂದು ಅವರು ಹೇಳಿದರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ, ಕರೋನಾ ಮಹಾಮಾರಿ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲಾ ಅಸ್ಪತ್ರೆ ಮಾದರಿಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಕೇಂದ್ರ, ಆಕ್ಸಿಜನ್ ಪ್ಲಾಂಟ್ದಿಂದ ಹಲವು ರೋಗಿಗಳಿಗೆ ಅನುಕೂಲವಾಗಿದೆ. ಸುಧಾಮೂರ್ತಿಯವರ ಈ ಪ್ರಯತ್ನದಿಂದ ಅನೇಕ ಬಡಜನರಿಗೆ ಅನುಕೂಲವಾಗಲಿದ್ದು, ಆಸ್ಪತ್ರೆಗೆ ಬರುವ ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಾಸಕ ಪ್ರದೇಶಾಭಿವೃದ್ದಿ ನಿಧಿಯಡಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: Vijayapura News | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿ ಆರಂಭ | ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪಾಲಿಕೆ ಸದಸ್ಯೆ ಆರತಿ ಶಹಾಪುರ, ಅಲ್-ಅಮೀನ್ ಮೆಡಿಕಲ್ ಕಾಲೇಜಿನ ಡಾ.ಬಿ.ಎಸ್.ಪಾಟೀಲ, ಬಿಎಲ್ಡಿಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಬಿಎಲ್ಡಿಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಜಿಲ್ಲಾಸ್ಪತ್ರೆಯ ರವಿಕಿತ್ತೂರ ಸೇರಿದಂತೆ ವಿವಿಧ ಅಧಿಕಾರಿಗಳು, ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.