ವಿಜಯಪುರ : ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಹೆಚ್ಚುವರಿ ಸೌಲಭ್ಯ ಕಲ್ಪಿಸುವುದು District Hospital Problems ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಂಘಟನೆಯ ಪ್ರಮುಖರು ಮಾತನಾಡಿ, ಜಿಲ್ಲಾಸ್ಪತ್ರೆಗೆ ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರರೋಗಿಗಳು ಬರುತ್ತಿದ್ದರೂ ಸಹ ಮೂಲಭೂತ ವ್ಯವಸ್ಥೆಗಳು ಸಮರ್ಪಕವಾಗಿ ಲಭ್ಯವಿಲ್ಲ ಎಂದು ದೂರಿದರು. ಇಂಡಿ, ಮುದ್ದೇಬಿಹಾಳ, ಸಿಂದಗಿ ಸೇರಿದಂತೆ ಬಾಗಲಕೋಟ, ಬೆಳಗಾವಿ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಜನ ಚಿಕಿತ್ಸೆಗಾಗಿ ಬರುತ್ತಿದ್ದಾರೆ ಎಂದು ತಿಳಿಸಿದರು.
District Hospital Problems ಹೆಚ್ಚಳ
ಜಿಲ್ಲಾಸ್ಪತ್ರೆಯಲ್ಲಿ ಎಂಆರ್ಐ, ಸಿಟಿ ಸ್ಕ್ಯಾನ್, ಸೂಪರ್ ಸ್ಪೆಷಾಲಿಟಿ ಕಟ್ಟಡ, ಟ್ರಾಮಾ ಸೆಂಟರ್ ಹಾಗೂ ಆಕ್ಸಿಜನ್ ಪ್ಲಾಂಟ್ಗಳಂತಹ ಆಧುನಿಕ ಸೌಲಭ್ಯಗಳಿದ್ದರೂ, ರೋಗಿಗಳಿಗೆ ಚೀಟಿ ಪಡೆಯಲು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಿಗ್ಗೆ 8 ಗಂಟೆಯಿಂದಲೇ ರೋಗಿಗಳು ಸಾಲಿನಲ್ಲಿ ನಿಂತರೂ ಚೀಟಿ ಸಿಗದೆ ವಾಪಸ್ಸು ಹೋಗುತ್ತಿದ್ದಾರೆ. ವಯಸ್ಸಾದವರು, ಗರ್ಭಿಣಿಯರು ಹಾಗೂ ಮಕ್ಕಳು ಬಿಸಿಲಿನಲ್ಲಿ ಪರದಾಡುತ್ತಿದ್ದಾರೆ ಎಂದು ಆರೋಪಿಸಿದರು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೌಂಟರ್ ತೆರೆಯದೇ ಇರುವುದರಿಂದ ನೂಕುನುಗ್ಗಲು ಹೆಚ್ಚಾಗಿದೆ ಎಂದರು.
ತಕ್ಷಣ ಹೆಚ್ಚುವರಿ ಕೌಂಟರ್ ತೆರೆಯುವುದು, ಉಚಿತ ಔಷಧಿ ವಿತರಣೆ, ನೆರಳು, ಕುರ್ಚಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಬಿ. ಭಗವಾನ್ ರೆಡ್ಡಿ, ಅರವಿಂದ್ ಕುಲಕರ್ಣಿ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ್ ಬಟಗಿ, ಬಾಬುರಾವ ಬೀರಕಬ್ಬಿ, ಸುರೇಶ್ ಬಿಜಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






