ಕೊರೋನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರ ತೀವ್ರ ತನಿಖೆಗೆ ಸೂಚನೆ

0
187

ವಿಜಯಪುರ ಎ.15: ನಗರದಲ್ಲಿ ಇತ್ತೀಚೆಗೆ ಕಂಡುಬಂದ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಲು ತೀವ್ರ ತನಿಖಾ ಕ್ರಮ ಕೈಗೊಳ್ಳುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆದಿತ್ಯ ಆಮ್ಲನ್ ಬಿಸ್ವಾಸ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರದಂದು ನಗರದ ನೂತನ ಪ್ರವಾಸ ಮಂದಿರದಲ್ಲಿ ಕೋವಿಡ್-19 ಕುರಿತು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ನಗರದಲ್ಲಿ ಕೊರೋನಾ ಸೋಂಕಿತರು ದೃಢಪಟ್ಟ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಮತ್ತು ಬಫರ್ ಜೋನ್ ವ್ಯಾಪ್ತಿಯಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು ತೀವ್ರತರ ಉಸಿರಾಟದ ತೊಂದರೆ ಅನುಭವಿಸುತ್ತಿರುವವರನ್ನು ಗುರುತಿಸಲು ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು ಕೊರೋನಾ ಸೋಂಕಿತ ಜನರೊಂದಿಗೆ ಸಂಪರ್ಕದಲ್ಲಿದ್ದವರನ್ನು ಮತ್ತು ಕೊರೋನಾ ಸೋಂಕು ತಗುಲಿರುವ ಕುರಿತು ಮೂಲ ಪತ್ತೆ ಹಚ್ಚಲು ತೀವ್ರತರ ತನಿಖೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೊರೋನಾ ಸೋಂಕಿತರೊಂದಿಗೆ ಸಾಮಾಜಿಕ ಮತ್ತು ಭೌಗೋಳಿಕ ಸಂಪರ್ಕಗಳನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಕಂಟೇನ್ಮೆಂಟ್ ಭಾಗದಲ್ಲಿ 60 ವರ್ಷ ಮೀರಿರುವ ವ್ಯಕ್ತಿಗಳನ್ನು ಗುರುತಿಸಬೇಕು. ಬಫರ್ ಜೋನ್ ವ್ಯಾಪ್ತಿಯಲ್ಲಿ ಯಾರಾದರೂ ಜ್ವರ, ಕೆಮ್ಮು, ನೆಗಡಿ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲಿ ಈ ಕುರಿತು ಯಾವುದೇ ಔಷಧಿಯ ಅಂಗಡಿಗಳಲ್ಲಿ ಇದಕ್ಕೆ ಸಂಬಂಧಪಟ್ಟ ಔಷಧಿ, ಮಾತ್ರೆ ಖರೀದಿ ಬಗ್ಗೆ ತೀವ್ರ ನಿಗಾ ಇಡಬೇಕು. ಪ್ರತಿ ಔಷಧಿ ಅಂಗಡಿಗಳಿಂದ ಇ-ಮೇಲ್ ಮೂಲಕ ನಿಗದಿತ ನಮೂನೆಯಲ್ಲಿ ಔಷಧಿ ಮಾರಾಟದ ಬಗ್ಗೆ ಔಷಧಿ ಖರೀದಿಸಿದ ವ್ಯಕ್ತಿ, ಪ್ರೀಸ್ಕ್ರೀಪಶನ್ ನೀಡಿರುವ ವೈದ್ಯರ ಮಾಹಿತಿಗಳ ಬಗ್ಗೆ ಅಂಕಿ ಅಂಶಗಳನ್ನು ತರಿಸಿಕೊಳ್ಳಬೇಕು. ಅದರಂತೆ ದೂರವಾಣಿಗಳ ಮೂಲಕವೂ ತಂಡಗಳ ಮೂಲಕ ಜನರನ್ನು ಸಂಪರ್ಕಿಸಿ ಜ್ವರ ಇರುವ ಬಗ್ಗೆ ವಿಚಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಅದರಂತೆ ಎಚ್‍ಐವಿ ಪಾಸಿಟಿವ್, ಕುಷ್ಠರೋಗ ಮತ್ತು ತೀವ್ರತರ ಕಾಯಿಲೆ ಇರುವಂತಹ ವ್ಯಕ್ತಿಗಳ ಬಗ್ಗೆಯೂ ತೀವ್ರ ನಿಗಾ ಇಡಬೇಕು. ಜಿಲ್ಲೆಯಲ್ಲಿ ಆಗುವಂತಹ ಪ್ರತಿಯೊಂದು ನೈಸರ್ಗಿಕ ಸಾವಿನ ಕುರಿತಂತೆ ಸಂಬಂಧಪಟ್ಟ ವೈದ್ಯಕೀಯ ತಜ್ಞರಿಂದ ದೃಢೀಕರಣಗೊಳಿಸುವ ಕ್ರಮ ಜಾರಿಗೊಳಿಸಬೇಕು. ಕೊರೋನಾ ನಿಯಂತ್ರಣದಲ್ಲಿ ಮುಂಚೂಣಿ ಕರ್ತವ್ಯದಲ್ಲಿರುವ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೊರೋನಾ ಮಹಾಮಾರಿ ಸಾಂಕ್ರಾಮಿಕ ರೋಗವಾಗಿದ್ದು, ಈ ಕುರಿತು ಪ್ರತಿಯೊಬ್ಬರು ಎಚ್ಚರಿಕೆ ವಹಿಸುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಈ ಕಾಯಿಲೆ ಕಟ್ಟಿಹಾಕಲು ಜಿಲ್ಲಾಡಳಿತದ ಮೂಲಕ ಉನ್ನತ ಮಟ್ಟದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿಯಂತೆ ಲಾಕ್‍ಡೌನ್ ಅನ್ವಯ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೋವಿಡ್-19 ಸಾಂಕ್ರಾಮಿಕ ಹರಡುವಿಕೆಯ ಆತಂಕಗಳನ್ನು ಹೊಂದಿದ್ದು, ಈ ಕುರಿತಂತೆ ಗಂಭೀರವಾಗಿ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ಧಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಕುಮಾರಿ ಸುರೇಖಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ. ಧಾರವಾಡಕರ, ಡಾ. ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


 

ambedkar image

LEAVE A REPLY

Please enter your comment!
Please enter your name here