ವಿಜಯಪುರ ಜೂನ್ 23: ಸಾಂಕ್ರಾಮಿಕವಾಗಿ ಹರಡುತ್ತಿರುವ ಕೋವಿಡ್-19 ನಿಯಂತ್ರಣಕ್ಕಾಗಿ ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಕೋವಿಡ್-19 ನಿಯಂತ್ರಣ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಸಾಂಕ್ರಾಮಿಕವಾಗಿ ಹರಡುತ್ತಿರುವ ಕೋವಿಡ್-19 ಕುರಿತು ಎಲ್ಲರು ಮುನ್ನೆಚ್ಚರಿಕೆ ವಹಿಸಬೇಕು. ಐ.ಎಲ್.ಐ ಮತ್ತು ಸಾರಿ ಸಂಬಂಧಿತ ಲಕ್ಷಣಗಳಿದ್ದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ತಿಳಿಸಿರುವ ಅವರು, ಅಧಿಕಾರಿಗಳು ಕೂಡಾ ಇಂತಹ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಸೂಚಿಸಿದರು.
ಕಂಟೇನ್ಮೆಂಟ್ ವಲಯ ಸೇರಿದಂತೆ ಇತರ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ತಿಳಿಸಿರುವ ಅವರು ಐ.ಎಲ್.ಐ ಮತ್ತು ಸಾರಿ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವುದರ ಜೊತೆಗೆ ಇಂತಹ ಲಕ್ಷಣವುಳ್ಳವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಜಿಲ್ಲಾ ಆಸ್ಪತ್ರಗಳ ವೈದ್ಯರೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು. ಅದರಂತೆ ಕೋವಿಡ್-19 ದಿಂದ ಆಗಬಹುದಾದ ಸಾವಿನ ಪ್ರಮಾಣವನ್ನು ಸಹ ಕಡಿಮೆಯಾಗುವಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.